ಬೆಳಗಾವಿ: ನಾವು ನೀಡಿದ್ದ ಸಲಹೆಗಳನ್ನು ಅಧಿಕಾರಿಗಳು ಅನುಷ್ಠಾನ ಮಾಡಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಮ್ಸ್ ಅಧಿಕಾರಿಗಳೊಂದಿಗೆ ಬೆಳಗಾವಿಯಲ್ಲಿ ಇಂದು ಯಮಕನಮರಡಿ ಕ್ಷೇತ್ರದ ಶಾಸಕರೂ ಆಗಿರುವ ಸತೀಶ್ ಜಾರಕಿಹೊಳಿ ಚರ್ಚೆ ನಡೆಸಿದರು.
ಕೆಲವು ದಿನಗಳ ಹಿಂದೆ ಕಾಂಗ್ರೆಸ್ ನಿಯೋಗದೊಂದಿಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಕೊರೊನಾ ನಿಯಂತ್ರಣಕ್ಕೆ ಸಲಹೆಗಳನ್ನು ನೀಡಲಾಗಿತ್ತು. ಅವುಗಳ ಅನುಷ್ಠಾನದ ಕುರಿತು ಇಂದು ಮಾಹಿತಿ ಪಡೆಯಲಾಯಿತು ಎಂದು ಅವರು ಹೇಳಿದರು.
ಕೋವಿಡ್ ತ್ವರಿತ ನಿಯಂತ್ರಣಕ್ಕಾಗಿ ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಇಂದಿನಿಂದ ಗ್ರಾಮಗಳಲ್ಲೂ ಪರೀಕ್ಷೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದು ಅಗತ್ಯವಾಗಿತ್ತು, ಜಿಲ್ಲೆಯ ಪ್ರತಿ ಹಳ್ಳಿಯಲ್ಲೂ ಪರೀಕ್ಷೆಗಳನ್ನು ಕೈಗೊಳ್ಳಬೇಕು. ಸೋಂಕಿತರಿಗೆ ಕೂಡಲೇ ಚಿಕಿತ್ಸೆ ಕೊಡಿಸಬೇಕು ಎಂದು ಅವರು ಸಲಹೆ ನೀಡಿದರು.
ಕೋವಿಡ್ ಮೂರನೇ ಅಲೆಯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಔಷಧಿ, ಆಕ್ಸಿಜನ್ ಹಾಗೂ ಬೆಡ್ ಗಳ ವ್ಯವಸ್ಥೆಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಬಿಮ್ಸ್ ನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆ ಹಾಗೂ ಯಮಕನಮರಡಿ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಲಾಯಿತು. ಕೆಲವು ಸೂಚನೆಗಳನ್ನು ಕೂಡ ನೀಡಲಾಯಿತು ಎಂದರು.