October 1, 2023 8:02 am

ಕೃಷಿ ಬಿಕ್ಕಟ್ಟಿಗೆ ಮೀಸಲಾತಿ ಪರಿಹಾರವೇ?

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ರೈತರು ಸ್ವಾಭಿಮಾನ, ಸ್ವಾವಲಂಬನೆ ಮತ್ತು ಗೌರವದಿಂದ ಜೀವನ ಮಾಡುತ್ತಿದ್ದರು. ಕಳೆದ 15 ವರ್ಷಗಳಲ್ಲಿ ಸರ್ಕಾರಗಳು ಅನುಸರಿಸಿದ ನೀತಿಗಳ ಪರಿಣಾಮವಾಗಿ ಮತ್ತು ವಿಜ್ಞಾನದ ಸಾಧನೆಗಳನ್ನು ಅವೈಜ್ಞಾನಿಕವಾಗಿ ಬಳಕೆ ಮಾಡಿದುದರ ಪರಿಣಾಮವಾಗಿ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಂಡು ಬರಡಾಗಿ ಲಕ್ಷಗಟ್ಟಲೆ ಎಕರೆ ಜಮೀನು ಪಾಳು ಬಿದ್ದಿದೆ. ಅಂತರ್ಜಲದ ಮಟ್ಟ ಪಾತಾಳಕ್ಕೆ ಇಳಿದಿದೆ. ವಿಪರೀತವಾಗಿ ರಸಗೊಬ್ಬರ, ಕಳೆನಾಶಕ, ಕೀಟನಾಶಕಗಳ ಬಳಕೆಯಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಜೀವ ವೈವಿಧ್ಯತೆ ನಾಶವಾಗಿದೆ. ಹೈಬ್ರಿಡ್ ಬೀಜಗಳ ಬಳಕೆಯಿಂದ ಬೀಜ ಕಣಜ ಧ್ವಂಸವಾಗಿದೆ. ಉತ್ಪಾದನಾ ವೆಚ್ಚ ಹೆಚ್ಚಿ ಫಸಲಿಗೆ ಸರಿಯಾದ ಬೆಲೆ ಸಿಗದೆ ರೈತರು ಸಾಲದ ಬಲೆಯಲ್ಲಿ ಸಿಕ್ಕಿ ಆತ್ಮಹತ್ಯೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಹಳ್ಳಿಯ ಜನರು ಆರ್ಥಿಕವಾಗಿ, ಸಾಮಾಜಿಕವಾಗಿ ದಿವಾಳಿಯಾಗಿದ್ದಾರೆ. ತಮ್ಮ ಮಕ್ಕಳನ್ನು ಓದಿಸಲು ಸಾಧ್ಯವಾಗುತ್ತಿಲ್ಲ ಮತ್ತು ಓದಿದ ಮಕ್ಕಳಿಗೆ ಉದ್ಯೋಗ ಕೊಡಿಸಲು ಸಾಧ್ಯವಾಗುತ್ತಿಲ್ಲ.

ಇಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಮೀಸಲಾತಿಯೇ ಈ ಸಮಸ್ಯೆಗಳಿಗೆ ಪರಿಹಾರವೆಂದು ಗುಜರಾತಿನ ಪಾಟೀದಾರರು, ಹರಿಯಾಣದ ಜಾಟರು, ರಾಜಸ್ತಾನದ ಗುಜ್ಜಾರರು, ಮಹಾರಾಷ್ಟ್ರದ ಮರಾಠಿಗರು, ಆಂಧ್ರಪ್ರದೇಶದ ಕಾಪುಗಳು ಮೀಸಲಾತಿ ಬೇಕೆಂದು ಹೋರಾಟ ಮಾಡುತ್ತಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳ ಒಂದು ಭಾಗವಾಗಿ ಕರ್ನಾಟಕದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ನೋಡಬೇಕಾಗಿದೆ. ರಾಜ್ಯದ ಕುರುಬರು ತಮ್ಮನ್ನು ಪ.ಪಂ.ಕ್ಕೆ ಸೇರಿಸಿ ಎಂದು, ಪಂಚಮಸಾಲಿ ಲಿಂಗಾಯತರು ತಮ್ಮನ್ನು ಪ್ರವರ್ಗ 2ಎಗೆ ಸೇರಿಸಿ ಎಂದು, ವಾಲ್ಮೀಕಿಯರು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಎಂದು, ಒಕ್ಕಲಿಗರು ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಎಂದು ಹೋರಾಟ ಮಾಡುತ್ತಿದ್ದಾರೆ. ಜೊತೆಗೆ ಸುಮಾರು ನಲವತ್ತೈದು ಇತರೆ ಸಣ್ಣ ಸಣ್ಣ ಜಾತಿಗಳು ಮೀಸಲಾತಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಇಟ್ಟಿವೆ. ಹೋರಾಟಕ್ಕೆ ಇಳಿದಿವೆ. ಆದರೆ ಅವರ ಜನಸಂಖ್ಯೆ ಕಡಿಮೆ ಇರುವ ಕಾರಣ ಅವರ ಧ್ವನಿ ಯಾರಿಗೂ ಕೇಳಿಸುತ್ತಿಲ್ಲ. ಮೀಸಲಾತಿ ಹೋರಾಟಕ್ಕೆ ಇಳಿದಿರುವ ಈ ಎಲ್ಲಾ ಜಾತಿಗಳ ಶೇ. 80ರಷ್ಟು ಜನ ಕೃಷಿಕರು. ಇವರ ಪೈಕಿ ಶೇ. 75ರಷ್ಟು ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರು. ರೈತರು ಅನೇಕ ರೀತಿಯ ಸಮಸ್ಯೆಗಳನ್ನು, ಕಷ್ಟಗಳನ್ನು ಮತ್ತು ನೋವನ್ನು ಅನುಭವಿಸುತ್ತಿದ್ದಾರೆ. ನಮ್ಮ ಸಮಸ್ಯೆಗಳನ್ನು ಪರಿಹರಿಸಿ ಮತ್ತು ನಮ್ಮ ಕಷ್ಟಗಳನ್ನು ನಿವಾರಿಸಿ ಎಂದು ರೈತರು ಕೇಳಿದರೆ ಸರ್ಕಾರಗಳು ಹಳೆ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ತಂದು ಮತ್ತು ಹೊಸ ಕಾಯ್ದೆಗಳನ್ನು ತಂದು ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಕಂಪೆನಿಗಳ ಕೈಗೆ ನೀಡುತ್ತಿವೆ. ಇದರಿಂದ ರೈತರು ಮತ್ತು ಕೃಷಿ ಕೂಲಿಗಾರರು ಗುಲಾಮರಾಗಿ ಬಾಳುವ ಸ್ಥಿತಿ ನಿರ್ಮಾಣವಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸರಿ ದಾರಿ ಯಾವುದು ಎಂಬ ಹುಡುಕಾಟದಲ್ಲಿದ್ದಾರೆ.

ನಮ್ಮ ಸಂವಿಧಾನ 1950ರಲ್ಲಿ ಜಾರಿಗೆ ಬಂದಾಗ ಪ.ಜಾ ಮತ್ತು ಪ. ಪಂ.ಗಳಿಗೆ ಮೀಸಲಾತಿ ನೀಡಿದ್ದನ್ನು ರೈತರು ವಿರೋಧಿಸಲಿಲ್ಲ ಅಥವಾ ತಮಗೆ ಮೀಸಲಾತಿ ಬೇಕೆಂದು ಬೇಡಿಕೆ ಇಡಲಿಲ್ಲ. ಇಂದು ಸಂಕಷ್ಟದಲ್ಲಿರುವ ರೈತರು ತಮ್ಮ ತಮ್ಮ ಜಾತಿಯ ಮೀಸಲಾತಿ ಹೋರಾಟಗಳಲ್ಲಿ ತೊಡಗಿದ್ದಾರೆ. ಸಂಕಷ್ಟದಲ್ಲಿರುವ ರೈತರು ಮೀಸಲಾತಿ ಹೋರಾಟಗಳಿಂದ ತಮ್ಮ ಸಮಸ್ಯೆಗಳಿಗೆ ಏನಾದರೂ ಪರಿಹಾರ ಸಿಗಬಹುದೆಂಬ ಪ್ರಾಮಾಣಿಕತೆಯನ್ನು ನಾನು ಪ್ರಶ್ನೆ ಮಾಡುತ್ತಿಲ್ಲ. ಜಾತಿ ಮೀಸಲಾತಿ ಹೋರಾಟದ ಮುಖಂಡತ್ವವನ್ನು ವಹಿಸಿರುವ ಮಠಾಧೀಶರ ಮತ್ತು ರಾಜಕಾರಣಿಗಳ ಸದುದ್ದೇಶವನ್ನು ನಾನು ಪ್ರಶ್ನಿಸುತ್ತಿಲ್ಲ.

ಆದರೆ ಈ ಮೀಸಲಾತಿ ಹೋರಾಟಗಳು ಸಮಸ್ಯೆಗೆ ಪರಿಹಾರವೆ? ಈ ಎಲ್ಲಾ ಜಾತಿವಾರು ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿದರೂ ಕೇವಲ ಶೇ. 2 ಅಥವಾ 3ರಷ್ಟು ಜನರಿಗೆ ಸಹಾಯವಾಗಬಹುದು. ಉಳಿದ ಶೇ. 97ರಷ್ಟು ಜನರ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಆದ್ದರಿಂದ ಎಲ್ಲ ಜಾತಿಯಲ್ಲಿರುವ ಬಹುಸಂಖ್ಯಾತ ರೈತರ ಕೃಷಿ ಬಿಕ್ಕಟ್ಟಿಗೆ ಮೀಸಲಾತಿಯು ಖಂಡಿತವಾಗಿಯೂ ಪರಿಹಾರ ಅಲ್ಲವೇ ಅಲ್ಲ. ಹಾಗಾದರೆ ಕೃಷಿ ಬಿಕ್ಕಟ್ಟಿಗೆ ಪರಿಹಾರವಾಗಬೇಕೆಂದರೆ ಸರ್ಕಾರಗಳು ತಂದಿರುವ ಹೊಸ ಕೃಷಿ ಕಾಯ್ದೆಗಳನ್ನು ಮತ್ತು ಹಳೆ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು. ಕೃಷಿ ಉತ್ಪಾದನಾ ವೆಚ್ಚ ಕಡಿಮೆ ಮಾಡಬೇಕು. ರೈತರು ಬೆಳೆದ ಫಸಲಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು. ಕೃಷಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಮಾರುಕಟ್ಟೆ ವ್ಯವಸ್ಥೆ ವಿಸ್ತರಿಸಬೇಕು. ಸಂಸ್ಕರಣೆ ಸಾರಿಗೆ ಇತ್ಯಾದಿಗಳ ಸುಧಾರಣೆಯಾಗಬೇಕು. ಕೃಷಿ ಆಧಾರಿತ ಕೈಗಾರಿಕೆಗಳು ಸ್ಥಾಪನೆಯಾಗಬೇಕು. ಕೃಷಿಯೇತರ ಕಸುಬುಗಳು ಮತ್ತು ಅದಕ್ಕೆ ಅಗತ್ಯವಿರುವ ಶಿಕ್ಷಣ ತರಬೇತಿ ಸಿಗಬೇಕು. ಈ ದಿಕ್ಕಿನಲ್ಲಿ ಸರ್ಕಾರಗಳು ಕಾರ್ಯೋನ್ಮುಖವಾಗಬೇಕು. ಎಲ್ಲಾ ಜಾತಿಯ ಮುಖಂಡರು, ರಾಜಕಾರಣಿಗಳು ಮತ್ತು ಮಠಾಧೀಶರು ಕೃಷಿ ಬಿಕ್ಕಟ್ಟಿನ ಪರಿಹಾರಕ್ಕೆ ಧ್ವನಿ ಎತ್ತುವುದರ ಮುಖಾಂತರ ಎಲ್ಲಾ ಜಾತಿಯ ರೈತರ ಒಗ್ಗಟ್ಟನ್ನು ಮತ್ತು ಎಲ್ಲರ ಹಿತವನ್ನು ಕಾಪಾಡಬೇಕು ಎಂದು ನಾನು ಮನವಿ ಮಾಡುತ್ತೇನೆ.

Share:

Leave a Reply

Your email address will not be published. Required fields are marked *

More Posts

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ

On Key

Related Posts

ಕಲ್ಲ ನಾಗರ ಕಂಡರೆ ಹಾಲೆರೆಯಂಬರಯ್ಯ,ದಿಟದ ನಾಗರ ಕಂಡರೆ ಕೊಲ್ಲೆಂಬರಯ್ಯ

ಹಾವು ಹಾಲು ಕುಡಿಯುವುದಿಲ್ಲ ಎಂದು ಪ್ರಾಣಿ ಶಾಸ್ತ್ರಜ್ಞರು ಹೇಳುತ್ತಾರೆ ಹಾಲನ್ನು ಹಾವಿನ ಬಾಯಿಗೆ ಹಾಕುವುದಿಲ್ಲ. ಅದನ್ನು ಮಣ್ಣಿನ ಹುತ್ತಕ್ಕೆ ಎರೆಯಲಾಗುತ್ತದೆ. ಅಂದರೆ ಪೌಷ್ಟಿಕ ಆಹಾರ ಮಣ್ಣುಪಾಲಾಗುತ್ತದೆ. ಅದೇ ಹಾಲನ್ನು ಅವಶ್ಯಕತೆ ಇರುವವರಿಗೆ ಆಹಾರವಾಗಿ ನೀಡಬಹುದಲ್ಲವೇ? ದೈವ ಭಕ್ತಿಗೂ, ಧರ್ಮ ಭಕ್ತಿಗೂ, ಪರಿಸರ

ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆ

ಇಂದು ಆಗಸ್ಟ್ 20. ರಾಷ್ಟ್ರೀಯ ವೈಜ್ಞಾನಿಕ ಮನೋವೃತ್ತಿ ದಿನಾಚರಣೆಯ ಸಂದರ್ಭದಲ್ಲಿ ಒಂದಷ್ಟು ಮಾತುಕತೆ…….. ವಿಜ್ಞಾನ ಮತ್ತು ಧರ್ಮ ಒಂದಕ್ಕೊಂದು ಪೂರಕವೇ ಅಥವಾ ವಿರುದ್ದವೇ ಅಥವಾ ಪರ್ಯಾಯವೇ ಅಥವಾ ಸಮಾನಾಂತರವೇ ಅಥವಾ ಪ್ರತಿಸ್ಪರ್ಧಿಗಳೇ ಅಥವಾ ಸಂಬಂಧವಿಲ್ಲವೇ….. ಧರ್ಮ ( ಮತ ) ಎಂಬುದು

ಬಸವ ಪಂಚಮಿ: ಒಂದು ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ

ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ಆದರೆ ಸಾಂಪ್ರದಾಯವಾದಿಗಳು ಆ ಆಚರಣೆಗಳನ್ನು ತಿರುಚಿ ಅವುಗಳಿಗೆ ಧಾರ್ಮಿಕ ಮೌಢ್ಯದ ಹಿನ್ನೆಲೆಯನ್ನು ಹೆಣೆದಿದ್ದಾರೆ. ಕೇವಲ ಧಾರ್ಮಿಕ ಹಿನ್ನೆಲೆಯಷ್ಟೆಯಲ್ಲದೆ ಅನೇಕ ಬಗೆಯ ಮೌಢ್ಯಗಳನ್ನು ಜನಮನದಲ್ಲಿ ಬಿತ್ತಿದ್ದಾರೆ.

ಶತಮಾನಗಳ ಕಾಲ ನಮ್ಮ ದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಮಹಿಳೆಯರು ಜಾತಿ ವ್ಯವಸ್ಥೆಯಲ್ಲಿ ರಾಜಕೀಯ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಸಮಾನತೆಯನ್ನು ಅನುಭವಿಸಿಕೊಂಡು ಬಂದಿದ್ದಾರೆ. ಎಲ್ಲಾ ರೀತಿಯ ಅಸಮಾನತೆಯನ್ನು ಕೊನೆಗಾಣಿಸಿ ಸಮಾನತೆಯನ್ನು ತರುವುದು ನಮ್ಮ ಸಂವಿಧಾನದ

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು