May 12, 2026 10:24 pm

ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕಾದ ಅಗತ್ಯತೆ

ಕರ್ನಾಟಕ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ನಾಗಮೋಹನ್ ದಾಸ್ ಅವರು ಸಂವಿಧಾನ ಓದು, ಸಂವಿಧಾನ ಮತ್ತು ವಚನಗಳು, ಮಾನವ ಹಕ್ಕುಗಳು ಮತ್ತು ಮೀಸಲಾತಿ ಭ್ರಮೆ ಮತ್ತು ವಾಸ್ತವ ಮೊದಲಾದ ಕೃತಿಗಳನ್ನು ಕನ್ನಡದಲ್ಲಿ ರಚಿಸಿದ್ದಾರೆ. ಈ ಮೂಲಕ ಸಾಂವಿಧಾನಿಕ ಆಶಯಗಳನ್ನು ಕನ್ನಡಿಗರಿಗೆ ಸರಳವಾಗಿ ತಲುಪಿಸುವ ಕೆಲಸವನ್ನು ಮಾಡಿದ್ದಾರೆ. ಮಾನವ ಹಕ್ಕುಗಳ ರಕ್ಷಣೆ ಮತ್ತು ಸಂವಿಧಾನದ ರಕ್ಷಣೆಯ ವಿಷಯದಲ್ಲಿ ಸಕ್ರಿಯರಾಗಿದ್ದಾರೆ. ನೂರಾರು ಉಪನ್ಯಾಸಗಳನ್ನು ನೀಡಿರುವ ಇವರು ಮಾನವೀಯ ಮೌಲ್ಯಗಳ ಪ್ರತಿಪಾದಕರಾಗಿದ್ದಾರೆ.

ಒಂದು ಶತಮಾನಕ್ಕೂ ಹೆಚ್ಚು ಇತಿಹಾಸವುಳ್ಳ ಮೀಸಲಾತಿ ನೀತಿಯ ಅನುಷ್ಠಾನದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಆದರೂ ಇಂದು ಹಲವು ಸಮಸ್ಯೆಗಳು ಮತ್ತು ಸವಾಲುಗಳು ಎದುರಾಗಿವೆ. ಒಳಮೀಸಲಾತಿ, ಕೆನೆಪದರ ಬಡ್ತಿಯಲ್ಲಿ ಮೀಸಲಾತಿ ಮತ್ತು ಖಾಸಗಿ ವಲಯದಲ್ಲಿ ಮೀಸಲಾತಿ ಎಂಬ ಪ್ರಶ್ನೆಗಳು ಕಾಡುತ್ತಿವೆ. ಮೀಸಲಾತಿ ಎಂದರೇನು ಮತ್ತು ವಿತರಣೆ ಎಂದರೇನು, ಮೀಸಲಾತಿ ಯಾವ ವಲಯಗಳಲ್ಲಿ ನೀಡಬೇಕು, ಯಾವ ವಲಯಗಳಲ್ಲಿ ನೀಡಬಾರದು. ಮೀಸಲಾತಿ ಸವಲತ್ತು ಯಾರಿಗೆ ತಲುಪಿಲ್ಲ ಮತ್ತು ಅವರಿಗೆ ಯಾವ ರೀತಿ ತಲುಪಿಸಬೇಕು ಇನ್ನೆಷ್ಟು ವರ್ಷ ಮೀಸಲಾತಿ ಮುಂದುವರೆಸಬೇಕು ಎಂಬ ಪ್ರಶ್ನೆಗಳು ಎದುರಾಗಿವೆ.

ಯಾವ ಜಾತಿಯನ್ನು ಯಾವ ಪಟ್ಟಿಗೆ ಸೇರಿಸಬೇಕು, ಯಾವ ಜಾತಿಯನ್ನು ಯಾವ ಪ್ರವರ್ಗಕ್ಕೆ ಸೇರಿಸಬೇಕು ಎಂಬ ವಿಷಯದಲ್ಲಿ ವೈಜ್ಞಾನಿಕ ಮಾನದಂಡಗಳನ್ನು ರೂಪಿಸುವುದು ಬೇಡವೆ? ಮಹಿಳೆಯರಿಗೆ ಮತ್ತು ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕೆ, ಅನಾಥ ಮಕ್ಕಳನ್ನು ಯಾವ ಧರ್ಮ, ಜಾತಿ ಮತ್ತು ಪ್ರವರ್ಗಕ್ಕೆ ಸೇರಿಸಬೇಕು, ಮತಾಂತರಗೊಂಡವರಿಗೆ ಮೀಸಲಾತಿ ನೀಡಬೇಕೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ವಿಸ್ತರಿಸಬೇಕೆ ಇತ್ಯಾದಿ ಹಲವು ಸವಾಲುಗಳು ಇವೆ.

ಕೆಲವು ಖಾಸಗಿ ಸಂಸ್ಥೆಗಳು ಒಂದೇ ಜಾತಿ ಅಥವಾ ಕೆಲವು ಮೇಲು ಜಾತಿ ನೌಕರರನ್ನು ನೇಮಿಸಿಕೊಂಡು ತಮ್ಮ ಉದ್ಯಮಗಳನ್ನು ನಡೆಸುತ್ತಿರುವುದು ವರ್ಣಭೇದವಲ್ಲವೆ? ಮೀಸಲಾತಿ ನೀತಿಯನ್ನು ಜಾರಿಗೊಳಿಸದ ಅಧಿಕಾರಿಗಳಿಗೆ ಶಿಕ್ಷೆ ಬೇಡವೆ? ಇತ್ಯಾದಿ ಅನೇಕ ಸಮಸ್ಯೆಗಳು ನಮ್ಮ ಮುಂದಿವೆ.

ಈ ರೀತಿಯ ಸಮಸ್ಯೆಗಳಿಗೆ, ಸವಾಲುಗಳಿಗೆ ಮತ್ತು ಪ್ರಶ್ನೆಗಳಿಗೆ ಸ್ಪಷ್ಟವಾದ ನೀತಿ ನಮ್ಮ ಸರ್ಕಾರಗಳ ಮುಂದೆ ಇಲ್ಲ. ನ್ಯಾಯಾಲಯದ ತೀರ್ಪುಗಳೂ ಸಹ ಅನೇಕ ಗೊಂದಲಗಳಿಗೆ ಎಡೆ ಮಾಡಿಕೊಟ್ಟಿವೆ. ಜೊತೆಗೆ ನ್ಯಾಯಾಲಯದ ತೀರ್ಪುಗಳಲ್ಲಿ ಸಾಮರಸ್ಯ ಕಾಣುತ್ತಿಲ್ಲ. ಸರಿಯಾದ ಉತ್ತರಗಳನ್ನು ತುರ್ತಾಗಿ ಕಂಡುಕೊಳ್ಳಬೇಕಾಗಿದೆ. ಇಲ್ಲವಾದಲ್ಲಿ ಸಮಾಜದ ವಿವಿಧ ಜಾತಿಗಳ ಮಧ್ಯೆ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತದೆ. ಮುಂದುವರೆದು ಜಾತಿ ಜಾತಿಗಳ ನಡುವೆ ತಮಗಾಗಿ ಮತ್ತು ತಮ್ಮ ಸ್ವಾರ್ಥಕ್ಕಾಗಿ ಸದಾ ಕಾದಾಡುವಂತೆ ಮಾಡುತ್ತದೆ. ಒಂದು ಜಾತಿಯನ್ನು ತುಳಿಯುವುದರ ಮೂಲಕ ಮತ್ತೊಂದು ಜಾತಿ ಅಸ್ತಿತ್ವದಲ್ಲಿರಲು ಪ್ರಯತ್ನಿಸುತ್ತದೆ. ಅಷ್ಟೇ ಅಲ್ಲ ಜಾತಿ ಮತ್ತು ಜಾತಿಪ್ರಜ್ಞೆಯು ದೇಶದ ಐಕ್ಯತೆಯನ್ನು ಅಸಾಧ್ಯವಾಗಿಸುತ್ತದೆ.

ಇಂತಹ ಪರಿಸ್ಥಿತಿಯಲ್ಲಿ ಸಮಸ್ಯೆಗಳ ಅಧ್ಯಯನ ಮಾಡಬೇಕಾಗಿದೆ. ಕಾರಣಗಳನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಪರಿಣಾಮಕಾರಿಯಾದ ಪರಿಹಾರಗಳನ್ನು ಜಾರಿಗೆ ತರಬೇಕಾಗಿದೆ. ಇರುವ ಕಾನೂನುಗಳಿಗೆ ಸಣ್ಣಪುಟ್ಟ ತಿದ್ದುಪಡಿಗಳನ್ನು ತರುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಇಡೀ ಮೀಸಲಾತಿ ನೀತಿಯನ್ನು ಪುನರ್ ರೂಪಿಸಬೇಕಾಗಿದೆ. ಪುನರ್ರೂಪಿಸುವ ಹೆಸರಿನಲ್ಲಿ ಈಗಾಗಲೇ ಇರುವ ಹಕ್ಕುಗಳನ್ನು ಕಿತ್ತುಕೊಳ್ಳಬಾರದು ಅಥವಾ ಮೊಟಕುಗೊಳಿಸಬಾರದು. ಇರುವಂಥ ಮೀಸಲಾತಿ ನೀತಿಯನ್ನು ಸರಿಪಡಿಸಿ ಉತ್ತಮಗೊಳಿಸಿ ಮತ್ತಷ್ಟು ಗಟ್ಟಿಗೊಳಿಸುವ ದಿಕ್ಕಿನಲ್ಲಿ ಪುನರ್ ರೂಪಿಸಬೇಕಾಗಿದೆ.

Share:

Leave a Reply

Your email address will not be published. Required fields are marked *

More Posts

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ

On Key

Related Posts

Composition of the Legislative Assemblies

Composition of the Legislative Assemblies:- (Subs. by the Constitution (Seventh Amendment) Act, 1956, s. 9, for art. 170.) (1) Subject to the provisions of article 333, the Legislative Assembly of

ವಿಧಾನಸಭೆಗಳ ಸಂರಚನೆ

ವಿಧಾನಸಭೆಗಳ ಸಂರಚನೆ 170. ವಿಧಾನಸಭೆಗಳ ಸಂರಚನೆ:- (1956ನೆಯ ಇಸವಿಯ ಸಂವಿಧಾನ (ಏಳನೆಯ ತಿದ್ದುಪಡಿ) ಅಧಿನಿಯಮದ 9ನೆಯ ಪ್ರಕರಣದ ಮೂಲಕ ಮೂಲ ಅನುಚ್ಛೇದಕ್ಕೆ ಬದಲಾಗಿ ಪ್ರತ್ಯಾಯೋಜಿಸಲಾಗಿದೆ.) (1) 333ನೆಯ ಅನುಚ್ಛೇದದ ಉಪಬಂಧಗಳಿಗೊಳಪಟ್ಟು, ಪ್ರತಿಯೊಂದು ರಾಜ್ಯದ ವಿಧಾನಸಭೆಯು ಆ ರಾಜ್ಯದಲ್ಲಿನ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳಿಂದ

ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು

169. ರಾಜ್ಯಗಳಲ್ಲಿ ವಿಧಾನಪರಿಷತ್ತುಗಳನ್ನು ರದ್ದುಗೊಳಿಸುವುದು ಅಥವಾ ಸೃಜಿಸುವುದು:- (1) 168ನೆಯ ಅನುಚ್ಛೇದದಲ್ಲಿ ಏನೇ ಇದ್ದಾಗ್ಯೂ, ವಿಧಾನಪರಿಷತ್ತು ಇರುವ ರಾಜ್ಯದಲ್ಲಿ ಅದನ್ನು ರದ್ದುಗೊಳಿಸಬೇಕೆಂದು ಅಥವಾ ಅಂಥ ಪರಿಷತ್ತು ಇಲ್ಲದ ರಾಜ್ಯದಲ್ಲಿ ಅಂಥ ಪರಿಷತ್ತನ್ನು ಸೃಜಿಸಬೇಕೆಂದು ಆ ರಾಜ್ಯದ ವಿಧಾನಸಭೆಯು ಆ ಸಭೆಯ ಒಟ್ಟು

CHAPTER III- THE STATE LEGISLATURE

General 168. Constitution of Legislatures in States:- (1) For every State there shall be a Legislature which shall consist of the Governor, and- (a) in the States of [Andhra Pradesh,]